ಮಂಗಳೂರು: 2009ರ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಯನ್ನು ಪತ್ರಕರ್ತ,ಪತ್ರಿಕೋದ್ಯಮ ಉಪನ್ಯಾಸಕ ಹರೀಶ್ ಕೆ.ಆದೂರು ಅವರಿಗೆ ರವಿವಾರ 21 ಮಾರ್ಚ್ 2010 ರಂದು ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪ್ರದಾನಿಸಿ ಗೌರವಿಸಲಾಯಿತು. ಮೇ 26, 2009ರ ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ ಮಳೆ ಬಿದ್ದ ಮೇಲೆ ಹೊರಜಗತ್ತಿಗಿವರು ಅಜ್ಞಾತ ವರದಿಗೆ ಪ್ರಶಸ್ತಿ ಲಭಿಸಿತ್ತು.ಕನ್ನಡ ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಕಾರ್ಯದರ್ಶಿ ಜಯರಾಮರಾಜೆ ಅರಸ್(ಭಾ.ಆ.ಸೇ) ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿದರು.
ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಾಧ್ಯಮಗಳ ಪಾತ್ರ ಪ್ರಮುಖವಾದುದು. ವ್ಯಕ್ತಿನಿಷ್ಠೆ, ಪಕ್ಷನಿಷ್ಠೆಗಳಿಂದ ಹೊರತಾಗಿ ವೃತ್ತಿನಿಷ್ಠೆಯನ್ನು ಮಾಧ್ಯಮ ಪ್ರತಿನಿಧಿಗಳು ಪಾಲಿಸಬೇಕು. ಗ್ರಾಮೀಣ ಪ್ರದೇಶದ ವರದಿಗಾರರೂ ಅತ್ಯುತ್ತಮ ಕಾರ್ಯಗಳನ್ನು ಮಾಡುತ್ತಾರೆ. ಅಲ್ಲಿ ಗ್ರಾಮೀಣ ವರದಿಗಾರರು, ಜಿಲ್ಲಾ ವರದಿಗಾರರು, ರಾಜ್ಯ ಮಟ್ಟದ ವರದಿಗಾರರು ಎಂಬ ತಾರತಮ್ಯ ಬೇಧ ಭಾವಗಳು ಬೇಡ. ಜನತೆಯೆಡೆಗೆ ಮಾಧ್ಯಮ ಪ್ರತಿನಿಧಿಗಳು ಸಾಗಿ, ಪ್ರತ್ಯಕ್ಷ ವಿಚಾರಗಳನ್ನು ಪರಾಂಬರಿಸಿ ಸತ್ಯಾಸತ್ಯತೆಗಳನ್ನು ಜನತೆಗೆ, ಸರಕಾರಕ್ಕೆ ತಿಳಿಸುವ ಮಹತ್ತರ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಜಯರಾಮರಾಜೆ ಅರಸ್ ಅಭಿಪ್ರಾಯ ಪಟ್ಟರು.
ರಾಜ್ಯ ಸರಕಾರದಿಂದ ಪ್ರಶಸ್ತಿ
ಇಂದು ರಾಜ್ಯ ಸರಕಾರ ಮಾಡಬೇಕಾದ ಕಾರ್ಯಕ್ರಮವನ್ನು ದ.ಕ.ಜಿಲ್ಲಾ ಪತ್ರಕರ್ತರ ಸಂಘ ಮಾಡುತ್ತಿದೆ. ಗ್ರಾಮೀಣ ಪ್ರದೇಶದ ವರದಿಗಾರರನ್ನು ಗುರುತಿಸಿ ಅವರಿಗೆ ಪ್ರಶಸ್ತಿ ನೀಡುವ ಕಾರ್ಯವನ್ನು ಸಂಘ ನಡೆಸುತ್ತಿದೆ. ಇದೊಂದು ಮಾದರಿ ಕಾರ್ಯಕ್ರಮ. ಮುಂದಿನ ದಿನಗಳಲ್ಲಿ ಸರಕಾರದ ವತಿಯಿಂದ ಇಂತಹ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ನಡೆಸಬೇಕಾಗಿದೆ. ಈ ಬಗ್ಗೆ ಸೂಕ್ತ ಮನವರಿಕೆಯನ್ನು ಸರಕಾರಕ್ಕೆ ಮಾಡಲಾಗುವುದು ಎಂದು ಅರಸ್ ಅಭಿಪ್ರಾಯಿಸಿದರು.
ಪಠ್ಯಪುಸ್ತಕಗಳಲ್ಲಿ ಬದಲಾವಣೆ ಬರಲಿ:
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪತ್ರಕರ್ತ ಹರೀಶ್ ಕೆ.ಆದೂರು ಅವರು ಇಂದು ಪತ್ರಿಕೋದ್ಯಮ ವಿಭಾಗದ ಪಠ್ಯಕ್ರಮಗಳಲ್ಲಿ ಸೂಕ್ತ ಬದಲಾವಣೆ ಆಗಬೇಕಾಗಿದೆ. ವಿ.ವಿ.ಗಳು ಈ ಬಗ್ಗೆ ಗಮನ ಹರಿಸಬೇಕಾಗಿದೆ. ಮಾಧ್ಯಮ ಜಗತ್ತು ಕ್ಷಿಪ್ರ ಪ್ರಗತಿಯನ್ನು ಕಾಣುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಪತ್ರಿಕೋದ್ಯಮ ಪಠ್ಯಕ್ರಮದಲ್ಲೂ ಅಂತಹುದೇ ಬದಲಾವಣೆ ಬರಬೇಕಾಗಿದೆ ಎಂದು ಅಭಿಪ್ರಾಯಿಸಿದರು.
ಹೆತ್ತವರಿಗೆ ಸಮರ್ಪಣೆ:
ಪ್ರತಿಷ್ಠಿತ ಪ.ಗೋ.ಪ್ರಶಸ್ತಿಗೆ ಭಾಜನರಾದ ಹರೀಶ್ ಕೆ.ಆದೂರು ಪ್ರಶಸ್ತಿಯನ್ನು ತನ್ನ ಹೆತ್ತವರಿಗೆ ಸಮರ್ಪಿಸಿದರು. ತನ್ನ ಇಂದಿನ ಈ ಸಾಧನೆಗೆ ಹೆತ್ತವರೇಕಾರಣ. ಆ ಕಾರಣಕ್ಕಾಗಿ ಪ್ರಶಸ್ತಿಯನ್ನು ಅವರಿಗೆ ಸಮರ್ಪಿಸುವುದಾಗಿ ಈ ಸಂದರ್ಭದಲ್ಲಿ ಘೋಷಿಸಿದರು.
ಪ್ರಶಸ್ತಿ ಮೊತ್ತ ರೂ.5001/- , ಪ್ರಶಸ್ತಿ ಪತ್ರ, ಹಾಗೂ ಸ್ಮರಣಿಕೆಗಳನ್ನು ಒಳಗೊಂಡಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಹರ್ಷ ವಹಿಸಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಗುರುವಪ್ಪ ಎನ್,ಟಿ,ಬಾಳೇಪುಣಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.ಸಂಘದ ಸದಸ್ಯ ಪುಷ್ಪರಾಜ್ ವಂದಿಸಿದರು.
Wednesday, March 31, 2010
Tuesday, March 16, 2010
ಹರೀಶ್ ಕೆ. ಆದೂರು ಅವರಿಗೆ ಪ.ಗೋ.ಪ್ರಶಸ್ತಿ
ಹರೀಶ್ ಕೆ.ಆದೂರ್ ಅವರು 2009ರ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮೇ 26, 2009ರ ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ ಮಳೆ ಬಿದ್ದ ಮೇಲೆ ಹೊರಜಗತ್ತಿಗಿವರು ಅಜ್ಞಾತ ವರದಿಗೆ ಪ್ರಶಸ್ತಿ ಲಭಿಸಿದೆ.ಪ್ರಶಸ್ತಿ ಪ್ರದಾನ ಸಮಾರಂಭ ಮಾರ್ಚ್ 21 ಆದಿತ್ಯವಾರ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಲಿದೆ .ಕನ್ನಡ ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಕಾರ್ಯದರ್ಶಿ ಜಯರಾಮರಾಜೆ ಅರಸ್(ಭಾ.ಆ.ಸೇ) ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಪ್ರಶಸ್ತಿ ಮೊತ್ತ ರೂ.5001/- , ಪ್ರಶಸ್ತಿ ಪತ್ರ, ಹಾಗೂ ಸ್ಮರಣಿಕೆಗಳನ್ನು ಒಳಗೊಂಡಿರುತ್ತದೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಗುರುವಪ್ಪ ಎನ್,ಟಿ,ಬಾಳೇಪುಣಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹರೀಶ್ ಕೆ.ಆದೂರು ಕಳೆದ 13ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. ಹಲವಾರು ಪತ್ರಿಕೆಗಳಿಗೆ ಹವ್ಯಾಸಿ ಬರಹಗಾರರಾಗಿದ್ದ ಹರೀಶ್ ತಮ್ಮ ದೈನಿಕ ಪತ್ರಿಕಾ ವೃತ್ತಿಯನ್ನು ಹೊಸದಿಗಂತ ಕನ್ನಡ ದೈನಿಕದಿಂದ ಪ್ರಾರಂಭಿಸಿದರು.
ನಂತರ ಉಷಾಕಿರಣ, ಸಂಯುಕ್ತ ಕರ್ನಾಟಕ, ವಾರಪತ್ರಿಕೆಗಳಾದ ಜೈಕನ್ನಡಮ್ಮ , ಲೋಕಾಯುಕ್ತ ದರ್ಶನಗಳಲ್ಲಿ ಸೇವೆಸಲ್ಲಿಸಿದ್ದಾರೆ. ಪ್ರಸ್ತುತ ಮೂಡಬಿದಿರೆಯ ಆಳ್ವಾಸ್ ಎಜುಕೇಷನ್ ಫೌಂಡೇಷನ್ ಪ್ರವರ್ತಿತ ಆಳ್ವಾಸ್ ಪದವಿ ಕಾಲೇಜಿನ ಪತ್ರಿಕೋದ್ಯಮ ಉಪನ್ಯಾಸಕ. ಜೊತೆಗೆ ಈ ಕನಸು.ಕಾಂ ಎಂಬ ಮಂಗಳೂರಿನ ಮೊದಲ ಕನ್ನಡ ಅಂತರ್ಜಾಲ ಪತ್ರಿಕೆಯ ಸಂಪಾದಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ
Subscribe to:
Posts (Atom)